ಆದಿಕಾಂಡ 18
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ (2017, 2019)
1
¶ ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು.
2
ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.
3
¶ “ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.
4
ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ.
5
ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು.
6
¶ ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು.
7
¶ ಆ ಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು.
8
ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.
9
¶ ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು.
10
¶ ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.
11
ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು.
12
ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.
13
¶ ಯೆಹೋವನು ಅಬ್ರಹಾಮನಿಗೆ, “ಸಾರಳು ನಕ್ಕು, ಮುದುಕಿಯಾದ, ನಾನು ಮಗುವನ್ನು ಹೆರುವುದಾದೀತೇ ಎಂದು ಹೇಳಿದ್ದೇನು?
14
ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.
15
¶ ಆಗ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, “ಹಾಗಲ್ಲ, ನೀನು ನಕ್ಕಿದ್ದುಂಟು” ಎಂದನು.
16
¶ ತರುವಾಯ ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡಲು ಅವರ ಜೊತೆಯಲ್ಲೇ ಹೋದನು.
17
ಆಗ ಯೆಹೋವನು ತನ್ನೊಳಗೆ, “ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವುದು ಸರಿಯೋ?
18
ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದಲ್ಲಾ;
19
ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.
20
¶ ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು,
21
ನಾನು ಇಳಿದು ಹೋಗಿ, ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿರುವರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ” ಎಂದನು.
22
¶ ಆ ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನಿಗೆ ಎದುರಾಗಿ ಇನ್ನೂ ನಿಂತುಕೊಂಡಿದ್ದನು.
23
¶ ಆಗ ಅಬ್ರಹಾಮನು ಹತ್ತಿರಕ್ಕೆ ಬಂದು, “ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ?
24
ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?
25
ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.
26
¶ ಯೆಹೋವನು, “ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು” ಎಂದನು.
27
¶ ಅದಕ್ಕೆ ಅಬ್ರಹಾಮನು, “ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ;
28
ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?” ಎಂದು ಕೇಳಲು ಯೆಹೋವನು, “ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.
29
¶ ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ, “ಒಂದು ವೇಳೆ ಅಲ್ಲಿ ನಲ್ವತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ನಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶ ಮಾಡುವುದಿಲ್ಲ” ಎಂದನು.
30
¶ ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.
31
¶ ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಅಂದನು.
32
¶ ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು.
33
¶ ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.